ದೆಹಲಿಯ ಜಂತರ್ ಮಂತರ್ನಲ್ಲಿ ‘ನೀಟ್’ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಪರಿಸರಪ್ರೇಮಿ ಸೋನಮ್ ವಾಂಗ್ಚುಕ್ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲಿಸಿ ಬೃಹತ್ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಬೆಳಗಾವಿಯ ದಲಿತ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ರಾಷ್ಟ್ರರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಬೆಳಗಾವಿ ಜಿಲ್ಲೆಯ ದಲಿತ ಸಂಘಟನೆಯ ಮುಖಂಡರು ಭಾಗವಹಿಸಿ, ನೀಟ್ ಅಕ್ರಮದ ವಿರುದ್ಧ ಧ್ವನಿ ಎತ್ತಿದರು. ಕೇಂದ್ರ ಸರ್ಕಾರದ ಧೋರಣೆಯಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಕತ್ತಲಿಗೆ ತಳ್ಳಲ್ಪಟ್ಟಿದೆ ಎಂದು ಹೋರಾಟಗಾರರು ಆರೋಪಿಸಿದರು. ಸಂವಿಧಾನಾತ್ಮಕವಾಗಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಪೊಲೀಸರ ಬಲಪ್ರಯೋಗದ ಮೂಲಕ ಜನರ ಹಾಗೂ ವಿದ್ಯಾರ್ಥಿಗಳ ಧ್ವನಿಯನ್ನು ಹತೋಟಿಗೆ ತರಲು ಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಹಕ್ಕಿಗಾಗಿ ಹಾಗೂ ಸಂವಿಧಾನದ ಉಳಿವಿಗಾಗಿ ಈ ಹೋರಾಟವನ್ನು ಮುಂದುವರಿಸುವುದಾಗಿ ಎಚ್ಚರಿಸಿದರು.

ಈ ಬೃಹತ್ ಹೋರಾಟದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಬೆಳಗಾವಿ ಜಿಲ್ಲಾ ಸಂಯೋಜಕ ಹಾಗೂ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಹಿಂಡಲಗಿ, ಭೀಮ್ ಆರ್ಮಿ ತಾಲೂಕು ಅಧ್ಯಕ್ಷ ಸಂದೀಪ್ ಚಲವಾದಿ, ರಾಘವೇಂದ್ರ ಚಲವಾದಿ, ಮಾರುತಿ ಕಾಂಬಳೆ, ರಾಮ್ ಮಾದರ್, ರವಿ ಮಾದರ್ ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
