Belagavi

ಸಿಎಂ ಪ್ರವಾಸದ ವೇಳೆ ಪ್ರೋಟೋಕಾಲ್ ಉಲ್ಲಂಘನೆ

Share

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 9ರಂದು ನಡೆದ ಬೆಳಗಾವಿ ಪ್ರವಾಸದ ವೇಳೆ ಆರೋಗ್ಯ ಇಲಾಖೆಯಿಂದ ಮುಖ್ಯಮಂತ್ರಿ ಪ್ರೋಟೋಕಾಲ್ ಉಲ್ಲಂಘನೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಈಶ್ವರ ಗಡಾದ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಬುಧವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರದ ನಿರ್ದೇಶನದಂತೆ ಮುಖ್ಯಮಂತ್ರಿಗಳ ಪ್ರವಾಸದ ಸಂದರ್ಭದಲ್ಲಿ ಅಡ್ವಾನ್ಸ್ ಲೈಫ್ ಸಪೋರ್ಟ್ ಆಂಬುಲೆನ್ಸ್, ಜೀವರಕ್ಷಕ ವೈದ್ಯಕೀಯ ಉಪಕರಣಗಳು ಹಾಗೂ ತಜ್ಞ ವೈದ್ಯರ ತಂಡವನ್ನು ನಿಯೋಜಿಸಬೇಕಾಗಿದ್ದರೂ, ಅದರ ಬದಲಿಗೆ ಸಾಮಾನ್ಯ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿಗಳ ವಾಸ್ತವ್ಯದ ಸ್ಥಳದಲ್ಲಿ ತಜ್ಞ ವೈದ್ಯರನ್ನು ನಿಯೋಜಿಸದೇ ಪಿಜಿ ವೈದ್ಯರನ್ನು ಕರ್ತವ್ಯಕ್ಕೆ ನೇಮಿಸಿರುವುದು, ವೈದ್ಯಕೀಯ ತಂಡದೊಂದಿಗೆ ನಿರಂತರ ಸಂಪರ್ಕ ಕಾಯ್ದುಕೊಳ್ಳದಿರುವುದು ಹಾಗೂ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸದೇ ಕರ್ತವ್ಯ ನಿರ್ವಹಿಸಿರುವುದು ಕೂಡ ಗಂಭೀರ ಲೋಪವೆಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.
ಮುಖ್ಯಮಂತ್ರಿಗಳ ಭದ್ರತೆ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಕನಿಷ್ಠ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸದಿರುವುದು ಮೇಲ್ನೋಟಕ್ಕೆ ದೃಢಪಟ್ಟಿದ್ದು, ಇದು ಮುಖ್ಯಮಂತ್ರಿ ಪ್ರೋಟೋಕಾಲ್‌ನ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಸಂಬಂಧ ಡಿಎಚ್ಒ ಡಾ. ಈಶ್ವರ ಗಡಾದ ಅವರು ಏಳು ದಿನಗಳೊಳಗೆ ಸಮರ್ಪಕ ಉತ್ತರ ಸಲ್ಲಿಸುವಂತೆ ಸೂಚಿಸಲಾಗಿದೆ. ನಿಗದಿತ ಅವಧಿಯಲ್ಲಿ ಸಮರ್ಪಕ ಉತ್ತರ ನೀಡದಿದ್ದಲ್ಲಿ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದರು.

Tags:

error: Content is protected !!