ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಹಾಗೂ ನಾಗನೂರು ರುದ್ರಾಕ್ಷಿಮಠದ ಎಸ್.ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಜು. 25ಕ್ಕೆ ರಾಜ್ಯಮಟ್ಟದ ಮನ್ನಿಜಗುಣ ಶಿವಯೋಗಿ ವಿರಚಿತ ‘ಕೈವಲ್ಯ ಪದ್ಧತಿ’ ಗಮಕ ಕಲೋತ್ಸವ ನಡೆಯಲಿದೆ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯ ಎಂ. ಖಾಸೀಮ್ ಮಲ್ಲಿಗೆಮಡುವು ಹೇಳಿದರು.

ಗುರುವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜು. 25ರಂದು ಬೆಳಿಗ್ಗೆ 9 ಗಂಟೆಗೆ ಎಸ್.ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಶಿವಕುಮಾರ ಸಂಬರಗಿಮಠ ಸಭಾಂಗಣದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ. ಡಾ. ಅಲ್ಲಮಪ್ರಭು ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷೆ ಶುಭ ಧನಂಜಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.
ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮುಕ್ಕಣ್ಣ ಕರಿಗಾರ, ಎಸ್.ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಿ.ಆರ್. ಪಟಗುಂದಿ, ಅಕಾಡೆಮಿ ರಿಜಿಸ್ಟ್ರಾರ್ ಎನ್. ನರೇಂದ್ರ ಬಾಬು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
