hubbali

ಮುಂದಿನ ವಾರ ಸಂಪುಟ ವಿಸ್ತರಣೆ ಸಾಧ್ಯ; ಅಲ್ಪಸಂಖ್ಯಾತರಿಗೆ ನಾಲ್ಕು ಸಚಿವ ಸ್ಥಾನ ನೀಡುವಂತೆ ಮನವಿ: ಸಲೀಂ ಅಹ್ಮದ್

Share

ರಾಜ್ಯ ಸಚಿವ ಸಂಪುಟದ ವಿಸ್ತರಣೆ ಮುಂದಿನ ವಾರ ನಡೆಯುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಈಗಾಗಲೇ 40 ವೀಕ್ಷಕರನ್ನು ನೇಮಕ ಮಾಡಲಾಗಿದೆ. ಆದಷ್ಟು ಶೀಘ್ರದಲ್ಲೇ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಹೇಳಿದರು.

ದೇಶದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಧಕ್ಕೆ ಉಂಟಾಗುವ ರೀತಿಯಲ್ಲಿ ಆಡಳಿತ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ತೀವ್ರವಾಗಿ ಖಂಡಿಸಿದರು. ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದು ಆರೋಪಿಸಿದ ಅವರು, ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಎಲ್ಲ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಈ ಘಟನೆಗೆ ಸಂಬಂಧಿಸಿದಂತೆ ದೇಶಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ ಎಂದು ತಿಳಿಸಿದ ಅವರು, ಕೇಂದ್ರ ಸರ್ಕಾರದ ನಡೆ ಖಂಡನೀಯವಾಗಿದೆ ಎಂದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಅವರು, ನೀಟ್ ಸಂಬಂಧಿತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಪ್ರಕ್ರಿಯೆ ಸ್ವಲ್ಪ ಮುಂದಕ್ಕೆ ಹೋಗಿದೆ. ಯಾರು ಸಚಿವರಾಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ಹಾಗೂ ವರಿಷ್ಠರು ಅಂತಿಮವಾಗಿ ನಿರ್ಧರಿಸಲಿದ್ದಾರೆ ಎಂದು ಹೇಳಿದರು.

ಈ ಬಾರಿ ತಮಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಹೇಳಿದ ಸಲೀಂ ಅಹ್ಮದ್, ರಾಜ್ಯ ಸಚಿವ ಸಂಪುಟದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ನಾಲ್ಕು ಸಚಿವ ಸ್ಥಾನಗಳನ್ನು ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

Tags:

error: Content is protected !!