Belagavi

ಕೆಪಿಸಿಸಿ ಎಸ್‌ಸಿ ಘಟಕದ ರಾಜ್ಯ ನಿರ್ದೇಶಕರಾಗಿ ಬೆಳಗಾವಿಯ ಹಿರಿಯ ದಲಿತ ಮುಖಂಡ ಮಲ್ಲೇಶ ಚೌಗುಲೆ ನೇಮಕ!

Share

ಬೆಳಗಾವಿ ಜಿಲ್ಲೆಯ ಹಿರಿಯ ದಲಿತ ಮುಖಂಡ, ಸಾಮಾಜಿಕ ಹೋರಾಟಗಾರ ಹಾಗೂ ಕಾಂಗ್ರೆಸ್ ಹಿರಿಯ ಧುರೀಣ ಮಲ್ಲೇಶ ಚೌಗುಲೆ ಅವರಿಗೆ ಪ್ರಮುಖ ಜವಾಬ್ದಾರಿ ಒಲಿದುಬಂದಿದೆ. ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಎಸ್‌ಸಿ ವಿಭಾಗದ ರಾಜ್ಯ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದ್ದು, ಕೆಪಿಸಿಸಿ ಎಸ್‌ಸಿ ವಿಭಾಗದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಧರ್ಮಸೇನ ಈ ಆದೇಶ ಹೊರಡಿಸಿದ್ದಾರೆ.
ಮಲ್ಲೇಶ ಚೌಗುಲೆ ಅವರು ದೀರ್ಘಕಾಲದಿಂದ ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯರಾಗಿದ್ದು, ಕಾಂಗ್ರೆಸ್ ಸೇವಾದಳ ಹಾಗೂ ಎಸ್‌ಸಿ-ಎಸ್‌ಟಿ ವಿಭಾಗದ ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ದಲಿತ ಸಮುದಾಯದ ಪರ ನಿರಂತರ ಹೋರಾಟ ನಡೆಸುತ್ತಿರುವ ಅವರಿಗೆ ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆದ ಅಂತರರಾಷ್ಟ್ರೀಯ ದಲಿತ ಸಾಹಿತ್ಯ ಪರಿಷತ್ತಿನಲ್ಲಿ ‘ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಸಾಮಾಜಿಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಜೊತೆಗೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಯುವ ಪ್ರಶಸ್ತಿ ಹಾಗೂ ರಾಜ್ಯ ಸರ್ಕಾರದ ಯುವ ಪ್ರಶಸ್ತಿಗೂ ಅವರು ಭಾಜನರಾಗಿದ್ದಾರೆ. ಪ್ರಸ್ತುತ ಅಖಿಲ ಭಾರತ ದಲಿತ ಯುವ ಸಂಘಟನೆಯ ಅಧ್ಯಕ್ಷರಾಗಿರುವ ಅವರ ಈ ನೇಮಕಕ್ಕೆ ಪಕ್ಷದ ಕಾರ್ಯಕರ್ತರು ಹಾಗೂ ಸಾಮಾಜಿಕ ವಲಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Tags:

error: Content is protected !!