ಆಸಾರ ಓಣಿಯಲ್ಲಿ ಮುಂಜಾನೆಯಿಂದಲೇ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.


ಹಿಂದೂ ಸಂಘಟನೆಗಳ ಪ್ರತಿಭಟನೆ ಹಾಗೂ ಮೆರವಣಿಗೆ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬೆಳಗ್ಗೆ 5:30ರಿಂದಲೇ ಪೊಲೀಸರು ಕರ್ತವ್ಯಕ್ಕೆ ಹಾಜರಾಗಿ ಭದ್ರತಾ ವ್ಯವಸ್ಥೆಯನ್ನು ಕೈಗೆತ್ತಿಕೊಂಡಿದ್ದಾರೆ.
ಆಸಾರ ಓಣಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿಡಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಹಳೇ ಹುಬ್ಬಳ್ಳಿಯ ಅಸಾರ ಹೊಂಡ ಪುಷ್ಕರಣಿ ವಿವಾದದ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳು ಹೋರಾಟಕ್ಕೆ ಕರೆ ನೀಡಿರುವ ಬೆನ್ನಲ್ಲೇ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಿದ್ದು, ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಆ್ಯಂಡ್ ಟೀಮ್ ರಸ್ತೆಗಿಳಿದು ಬಂದೋಬಸ್ತ್ ಪರಿಶೀಲನೆ ನಡೆಸಿದರು.
ದೇವಸ್ಥಾನದ ಸಂಪರ್ಕ ಕೊಂಡಿಯಾಗಿರುವ ರಸ್ತೆಗಳಿಗೆ ಬ್ಯಾರಿಕೇಡ್ ಹಾಗೂ ಗೇಟ್ ಹಾಕಿ ಸಂಪೂರ್ಣ ಬಂದ್ ಮಾಡಲಾಗಿದೆ. ಈ ನಿಟ್ಟಿನಲ್ಲಿ ಡಿಸಿಪಿಗಳ ಸಹಭಾಗಿತ್ವದಲ್ಲಿ ಕಮಿಷನರ್ ರೌಂಡ್ಸ್ ನಡೆಸುವ ಮೂಲಕ ಬಂದೋಬಸ್ತ್ ಪರಿಶೀಲನೆ ನಡೆಸಿದರು.
ಬಿಎನ್ಎಸ್ಎಸ್ 163 ಸೆಕ್ಷನ್ ಕಾಯ್ದೆಯಡಿ ನಿಷೇಧಾಜ್ಞೆ ಜಾರಿ ಮಾಡಿದ ಹಿನ್ನೆಲೆಯಲ್ಲಿ 1500ಕ್ಕೂ ಅಧಿಕ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಈ ಬಗ್ಗೆ ಕಮಿಷನರ್ ಖುದ್ದು ಸ್ಥಳ ಪರಿಶೀಲನೆ ನಡೆಸಿರುವುದು ಗಮನ ಸೆಳೆದಿದೆ.
