ನವಲಗುಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎಚ್. ಕೊನರೆಡ್ಡಿ ಅವರು ಕಾನೂನುಬಾಹಿರವಾಗಿ ಪೊಲೀಸ್ ಎಸ್ಕಾರ್ಟ್ ವಾಹನ ಬಳಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದರ ಮುಂದುವರಿದ ಭಾಗವಾಗಿ, ಸಾಮಾಜಿಕ ಕಾರ್ಯಕರ್ತ ಮಾಬುಸಾಬ್ ಯರಗುಪ್ಪಿ ಅವರು ಶಾಸಕರ ವಿರುದ್ಧ ಲೋಕಾಯುಕ್ತ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.

ಈ ಹಿಂದೆ ಶಾಸಕರು ಅನಧಿಕೃತವಾಗಿ ಪೊಲೀಸ್ ಎಸ್ಕಾರ್ಟ್ ವಾಹನಗಳನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದ ಮಾಬುಸಾಬ್ ಅವರು, ರಾಜ್ಯದ ಗೃಹ ಸಚಿವರು ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದ್ದರು. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಅವರು, ಕಾನೂನುಬಾಹಿರವಾಗಿ ಪೊಲೀಸ್ ಎಸ್ಕಾರ್ಟ್ ವಾಹನ ಬಳಸಿಕೊಂಡಿರುವ ಶಾಸಕರಿಂದಲೇ ವಾಹನಗಳ ಖರ್ಚು-ವೆಚ್ಚ, ಡೀಸೆಲ್ ಹಾಗೂ ಸಿಬ್ಬಂದಿಯ ವೇತನವನ್ನು ವಸೂಲಿ ಮಾಡಬೇಕು ಎಂದು ಬಲವಾಗಿ ಆಗ್ರಹಿಸಿದ್ದಾರೆ.
