ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರವಾಸದಲ್ಲಿದ್ದ ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು, ಬೆಕ್ಕಿನಕೇರಿ ಗ್ರಾಮದ ಮುಖಂಡರಾದ ನಾರಾಯಣ ಬೆಳಗಾಂವ್ಕರ್ ಅವರ ಪತ್ನಿ ಶ್ರೀಮತಿ ಶಾಂತಾ ಅವರು ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿರುವ ವಿಷಯ ತಿಳಿದು, ತಕ್ಷಣ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ನಾರಾಯಣ ಬೆಳಗಾಂವ್ಕರ್ ಅವರು ತಮ್ಮ ಪತ್ನಿ ಶಾಂತಾ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಶಾಂತಾ ಅವರಿಗೆ ಗಾಯಗಳಾಗಿದ್ದವು. ವಿಷಯ ತಿಳಿದ ಕೂಡಲೇ ಲಕ್ಷ್ಮೀ ಹೆಬ್ಬಾಳಕರ್ ಅವರು ಸ್ಥಳಕ್ಕೆ ತೆರಳಿ ಶಾಂತಾ ಅವರ ಆರೋಗ್ಯದ ಸ್ಥಿತಿಗತಿಯನ್ನು ವಿಚಾರಿಸಿದರು.
ಗಾಯಗೊಂಡಿದ್ದ ಶಾಂತಾ ಅವರೊಂದಿಗೆ ಆತ್ಮೀಯವಾಗಿ ಮಾತನಾಡಿದ ಹೆಬ್ಬಾಳಕರ್ ಅವರು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಅವರ ಆರೋಗ್ಯದ ಕುರಿತು ಕುಟುಂಬದ ಸದಸ್ಯರಿಂದಲೂ ಮಾಹಿತಿ ಪಡೆದುಕೊಂಡರು.
ಅಲ್ಲದೆ, ಹೆಚ್ಚಿನ ಚಿಕಿತ್ಸೆ ಹಾಗೂ ವೈದ್ಯಕೀಯ ತಪಾಸಣೆಯ ಅಗತ್ಯವಿರುವ ಹಿನ್ನೆಲೆಯಲ್ಲಿ ತಮ್ಮ ಆಪ್ತ ಸಹಾಯಕರನ್ನು ಜೊತೆಗಿರಿಸಿ, ಶಾಂತಾ ಅವರನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟರು. ವೈದ್ಯರೊಂದಿಗೆ ಸಂಪರ್ಕದಲ್ಲಿದ್ದು, ಅಗತ್ಯವಿರುವ ತುರ್ತು ಚಿಕಿತ್ಸೆ ಹಾಗೂ ಸೂಕ್ತ ವೈದ್ಯಕೀಯ ಆರೈಕೆಯನ್ನು ತಕ್ಷಣ ನೀಡುವಂತೆ ಸೂಚಿಸಿದರು.
ಜನರ ಸಂಕಷ್ಟದ ಸಂದರ್ಭದಲ್ಲಿ ತಕ್ಷಣ ಸ್ಪಂದಿಸುವುದು ತಮ್ಮ ಕರ್ತವ್ಯವಾಗಿದ್ದು, ಶಾಂತಾ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಹಾರೈಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

