Chikkodi

ಚಿಕ್ಕೋಡಿಯಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ: ಒಂದೇ ದಿನ 13 ಜನರಿಗೆ ಗಾಯ, ಪುರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

Share

ಚಿಕ್ಕೋಡಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರು ಹಾಗೂ ಹಾದಿಹೋಕರು ಭೀತಿಯಲ್ಲಿ ದಿನ ದೂಡುವಂತಾಗಿದೆ. ಒಂದೇ ದಿನದಲ್ಲಿ ವಿವಿಧ ಬಡಾವಣೆಗಳಲ್ಲಿ ಬರೋಬ್ಬರಿ 13 ಜನರ ಮೇಲೆ ಹುಚ್ಚು ನಾಯಿಗಳು ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.

ಪಟ್ಟಣದ ಪ್ರಮುಖ ಪ್ರದೇಶಗಳಾದ ಇಂದಿರಾನಗರ, ಕೆ.ಸಿ. ರೋಡ್ ಹಾಗೂ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ನಾಯಿಗಳು ಹಿಂಡು ಹಿಂಡಾಗಿ ಸಂಚರಿಸುತ್ತಿದ್ದು, ಎದುರಿಗೆ ಬಂದವರ ಮೇಲೆ ಏಕಾಏಕಿ ದಾಳಿ ಮಾಡುತ್ತಿವೆ. ನಾಯಿಗಳ ರೌದ್ರಾವತಾರಕ್ಕೆ ಬೆಚ್ಚಿಬಿದ್ದಿರುವ ಸ್ಥಳೀಯರು ಹಾಗೂ ಪ್ರಯಾಣಿಕರು ರಸ್ತೆಯಲ್ಲಿ ಓಡಾಡಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ.

ಕಳೆದ 15 ದಿನಗಳಿಂದ ಪಟ್ಟಣದಾದ್ಯಂತ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಸಾಲು ಸಾಲು ದಾಳಿಗಳು ನಡೆಯುತ್ತಿದ್ದರೂ ಚಿಕ್ಕೋಡಿ ಪುರಸಭೆ ಅಧಿಕಾರಿಗಳು ಮಾತ್ರ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದ್ದಾರೆ. ಸಾರ್ವಜನಿಕರು ಹಾಗೂ ಬಡಾವಣೆಯ ಪ್ರಮುಖರು ಹಲವು ಬಾರಿ ಪುರಸಭೆಗೆ ತೆರಳಿ ನಾಯಿಗಳನ್ನು ಹಿಡಿದು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರೂ, ಅಧಿಕಾರಿಗಳು ‘ಡೋಂಟ್ ಕೇರ್’ ಧೋರಣೆ ತಳೆದಿದ್ದಾರೆ ಎಂದು ಪುರಸಭೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಅಧಿಕಾರಿಗಳ ಈ ನಿರ್ಲಕ್ಷ್ಯದ ನಡವಳಿಕೆಯಿಂದಾಗಿ ಸಾರ್ವಜನಿಕರು ಮತ್ತು ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಪುರಸಭೆ ಕಾರ್ಯಾಚರಣೆ ನಡೆಸಿ ಬೀದಿ ನಾಯಿಗಳ ಹಾವಳಿಗೆ ಮುಕ್ತಿ ನೀಡಬೇಕು. ಇಲ್ಲವಾದಲ್ಲಿ ಪುರಸಭೆ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ನಾಗರಿಕರು ಎಚ್ಚರಿಸಿದ್ದಾರೆ.

ಡಿ.ಕೆ‌.ಉಪ್ಪಾರ ಇನ್ ನ್ಯೂಸ್ ಚಿಕ್ಕೋಡಿ

Tags:

error: Content is protected !!